ಚಿತ್ರದುರ್ಗ:ಕೋವಿಡ್ ಎರಡನೇ ಅಲೆಯಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ 52 ಮಕ್ಕಳು ರಾಜ್ಯದಲ್ಲಿದ್ದಾರೆ.ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಅವರು ಚಿತ್ರದುರ್ಗ ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ತಂದೆ ತಾಯಿಯನ್ನು ಕಳೆದುಕೊಂಡು ಯಾವುದೇ ಮಕ್ಕಳು ಇಲ್ಲ ಮಾಹಿತಿ ಇದೆ. ಆದರೆ ಜಿಲ್ಲೆಯಲ್ಲಿ ಏಕಪೋಷಕರನ್ನು ಕಳೆದುಕೊಂಡ 30 ಮಕ್ಕಳಿದ್ದಾರೆ. ಕೋವಿಡ್ ಎರಡನೇ ಅಲೆಯಿಂದಾಗಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗಾಗಿ ಮುಖ್ಯಮಂತ್ರಿಗಳು ಈಗಾಗಲೇ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಘೋಷಣೆ ಮಾಡಿದ್ದಾರೆ. ಈ ಯೋಜನೆಯನ್ವಯ ಅನಾಥ ಮಕ್ಕಳಿಗೆ ಪ್ರತಿ ತಿಂಗಳು ರೂ.3500/-ಗಳನ್ನು ಅವರ ಖಾತೆಗೆ ಜಮಾ ಮಾಡಲಾಗುವುದು. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಅವರಿಗೆ ಉಚಿತ ಶಿಕ್ಷಣ ನೀಡುವುದು. ಅದೇ ರೀತಿ ಎಸ್ಎಸ್ಎಲ್ಸಿ ನಂತರ ಉನ್ನತ ಶಿಕ್ಷಣಕ್ಕೆ ಲ್ಯಾಪ್ಟಾಪ್ ಅಥವಾ ಟ್ಯಾಬ್ ನೀಡುವುದು. 21 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ರೂ.1 ಲಕ್ಷ ನೀಡಲು ತೀರ್ಮಾನಿಸಲಾಗಿದ್ದು, ಇದು ಮುಖ್ಯಮಂತ್ರಿ ಬಾಲಸೇವಾ ಯೋಜನೆಯ ಕಾರ್ಯಕ್ರಮಗಳಾಗಿವೆ ಎಂದು ತಿಳಿಸಿದರು.
ತಂದೆ ತಾಯಿಯನ್ನು ಕಳೆದುಕೊಂಡ 52 ಮಕ್ಕಳಲ್ಲಿ 20 ಮಕ್ಕಳೊಂದಿಗೆ ಚರ್ಚೆ ಮಾಡಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲಾಗಿದೆ. ಕೋವಿಡ್ನಿಂದ ಮಧ್ಯಮ ಮತ್ತು ಬಡ ವರ್ಗದ ಮಕ್ಕಳು ಅನಾಥರಾಗಿದ್ದಾರೆ. ಪ್ರಸ್ತುತ ಅವರು ಸಂಬಂಧಿಕರ ಬಳಿ ಆಶ್ರಯ ಪಡೆದಿದ್ದಾರೆ. ಆದರೆ ಅವರಿಗೆ ಬಡತನವಿದ್ದರೆ ಅಂತಹ ಮಕ್ಕಳನ್ನು ಪೋಷಣೆ ಮಾಡುವುದು ಕಷ್ಟಸಾಧ್ಯವಾಗಬಹುದು. ಅಂಥ ಸಂದರ್ಭದಲ್ಲಿ ಆ ಮಕ್ಕಳ ದುರುಪಯೋಗವಾಗಬಾರದು ಎಂಬ ಮುಂದಿನ ಭವಿಷ್ಯದ ದೃಷ್ಠಿಯಿಂದ ಅಂತಹ ಮಕ್ಕಳನ್ನು ಇಲಾಖೆಯ ವಶಕ್ಕೆ ಪಡೆದು ದತ್ತು ಸ್ವೀಕಾರದ ಮೂಲಕ ನೋಂದಣಿ ಮಾಡಿಕೊಂಡು ಒಳ್ಳೆಯ ಕುಟುಂಬಕ್ಕೆ ಸೇರಿಸುವ ಕಾರ್ಯವೂ ನಡೆಯುತ್ತಿದೆ ಎಂದರು
ಸಂಯುಕ್ತವಾಣಿ
ಜಾಹೀರಾತು ಮತ್ತು ಸುದ್ದಿಗಳಿಗಾಗಿ ಸಂಪರ್ಕಿಸಿ
8660924503