ಚಿತ್ರದುರ್ಗ:ಜಿಲ್ಲಾಸ್ಪತ್ರೆಯಲ್ಲಿ ಇರುವ ವೆಂಟಿಲೇಟರ್ಗಳು ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಸಂಸದ ಎ.ನಾರಾಯಣಸ್ವಾಮಿ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ವೆಂಟಿಲೇಟರ್ ಇಟ್ಟುಕೊಂಡು ಉಪಯೋಗಕ್ಕೆ ಬಾರದ ರೀತಿಯಲ್ಲಿ ಇರಬಾರದು. ವೆಂಟಿಲೇಟರ್ ಅಪರೇಟ್ ಮಾಡಲು ಅವಶ್ಯಕ ಇರುವ ಅನಸ್ತೇಶಿಯಾ ವೈದ್ಯರು ಹಾಗೂ ಟೆಕ್ನಿಕಲ್ ಅಪರೇಟರ್ ನಿಯೋಜನೆ ಮಾಡಿಕೊಳ್ಳಬೇಕು. ವೆಂಟಿಲೇಟರ್ ಬಳಕೆ ಮಾಡಿ ಕೋವಿಡ್ ಸೋಂಕಿನ ಮರಣ ಹೊಂದುವವರ ಪ್ರಮಾಣವನ್ನು ತಗ್ಗಿಸಬೇಕು ಎಂದರು.
ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ರೆಮ್ಡಿಸಿವಿರ್ ಕೊರತೆ ಆಗಬಾರದು. ಇವುಗಳನ್ನು ಸಂಗ್ರಹ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ ಮಾಡುವ ಕುರಿತು ಚರ್ಚಿಸಿದ ಅವರು, ಜಿಲ್ಲೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ ಮಾಡುವ ಸಂಬಂಧ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಆರ್ಟಿಪಿಸಿಆರ್ ಲ್ಯಾಬ್ ತೆರೆಯಲು ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಲು ಜಿಲ್ಲಾಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.
ಜನಸಂದಣಿ, ಕೃಷಿ ಮಾರುಕಟ್ಟೆ ಪ್ರಾಂಗಣ, ಸಂತೆ, ತರಕಾರಿ ಮಾರುಕಟ್ಟೆ ಸೇರಿದಂತೆ ಜನರು ಗುಂಪು ಗೂಡುವ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸೋಂಕು ಹರಡುವಿಕೆಯನ್ನು ತಪ್ಪಿಸಲು ಪೊಲೀಸರು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಂಸದರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ. ನಂದಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಫಾಲಾಕ್ಷ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಸಂಯುಕ್ತ ವಾಣಿ