ಚಿತ್ರದುರ್ಗ: ಹೊಳಲ್ಕೆರೆ ಕ್ಷೇತ್ರದ 300 ಹಳ್ಳಿಗಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದಕ್ಕಾಗಿ 276 ಕೋಟಿ ಅನುದಾನ ಮಂಜೂರಾತಿ ಮಾಡಿಸಿ ವಾಣಿವಿಲಾಸ ಜಲಾಶಯದಿಂದ ನೀರು ತರುವ ಕೆಲಸ ಇನ್ನೂ ಒಂದು ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ಅವರು ಹೊಳಲ್ಕೆರೆ ತಾಲೂಕಿನ ರಾಮಗಿರಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎರಡು ವರ್ಷದೊಳಗೆ ಎಲ್ಲರ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಇದರ ಜೊತೆಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಪೈಪ್ಲೈನ್ ಹಾಕುವ ಕಾರ್ಯ ಶೇ.90ರಷ್ಟು ಮುಗಿದಿದೆ ಎಂದು ಹೇಳಿದರು.ಇನ್ನು
ಕೋವಿಡ್-19 ಕಾರಣದಿಂದಾಗಿ ರಾಮಗಿರಿ ಆಸ್ಪತ್ರೆ ಉದ್ಘಾಟನೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಈದಿನ ಸಚಿವರಾದ ಬಿ.ಶ್ರೀರಾಮುಲು ಉದ್ಘಾಟನೆ ನೆರವೇರಿಸಿದ್ದಾರೆ. ಕಳೆದ ಬಾರಿ ಶಾಸಕನಾದ ಸಂದರ್ಭದಲ್ಲಿ ತುಪ್ಪದಹಳ್ಳಿ, ಶಿವಗಂಗ, ಮಲ್ಲಾಡಿಹಳ್ಳಿ, ಗೌಡಿಹಳ್ಳಿ, ಎನ್.ಜಿ.ಹಳ್ಳಿಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿಸಲಾಗಿದೆ. ರಾಮಗಿರಿ ಗ್ರಾಮದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ಯಾವುದೇ ಸಿಟಿಗಿಂತ ಕಡಿಮೆ ಇಲ್ಲದಂತೆ ಸರ್ಕಲ್ಅನ್ನು ಅಭಿವೃದ್ದಿ ಪಡಿಸಲಾಗಿದೆ ಎಂದರು.
ಇದಲ್ಲದೆ 250 ಕೋಟಿ ವೆಚ್ಚದಲ್ಲಿ ಕೆ.ಪಿ.ಟಿ.ಸಿ.ಎಲ್.ನಿಂದ ಕೋಟೆಹಾಳ್ ಸಮೀಪ ವಿತರಣಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು ಇಡೀ ತಾಲ್ಲೂಕಿಗೆ ಮುಂದಿನ ದಿನಗಳಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ; ರಂಗನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ;ಜಯಸಿಂಹ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರಾಜಶೇಖರ್, ಪುರಸಭೆ ಅಧ್ಯಕ್ಷರಾದ ಅಶೋಕ್, ಉಪಾಧ್ಯಕ್ಷರಾದ ರಮೇಶ್, ಸದಸ್ಯರಾದ ಮುರುಗೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಂಯುಕ್ತವಾಣಿ