ಬೆಂಗಳೂರು: ಯಡಿಯೂರಪ್ಪ ಮಂಡಿಸಿದ ಇಂದಿನ ಬಜೆಟ್ ನಲ್ಲಿ ಬಹು ದಿನಗಳ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜ್ ಗೆ ಖಾಸಗಿ ಸಹ ಭಾಗಿತ್ವದಲ್ಲಿ ಆರಂಭಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಸುಮಾರು 40 ವರ್ಷಗಳಿಂದಲೂ ಕೋಟೆನಾಡಿನ ಜನರ ಬಹು ಬೇಡಿಕೆ ಎಂದರೆ ಅತ್ಯಂತ ಹಿಂದುಳಿದ ಜಿಲ್ಲೆಗೆ ಮೆಡಿಕಲ್ ಕಾಲೇಜ್ ನೀಡಬೇಕು ಎಂದು ಅನೇಕ ಸಂಘ ಸಂಸ್ಥೆಗಳು ಹೋರಾಟ ಮಾಡಿದ್ದವು. ಇದರ ಪ್ರತಿಫಲವಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ 25 ಎಕೆರೆ ಜಮೀನಿನಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸಲಾಗುತ್ತದೆ. ಇದಕ್ಕೆ ಖನಿಜ ಸಂಪತ್ತಿನ ಹಣವನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿ ಹೋಗಿದ್ದರು. ಆದರೆ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಪ್ರಸ್ತಾಪವೇ ಇಲ್ಲ ಎಂದು ಸುಧಾಕರ್ ಹೇಳಿದ್ದು ಜಿಲ್ಲೆಯ ಜನರು ಹೋರಾಟಗಾರರು ಹಾಗೂ ಜನಪ್ರತಿನಿಧಿಗಳಲ್ಲಿ ಬೇಸರ ತರಿಸಿತ್ತು. ಇದಕ್ಕೆ ಜನಪ್ರತಿನಿಧಿಗಳು ಬಜೆಟ್ ನಲ್ಲಿ ಮೆಡಿಕಲ್ ಕಾಲೇಜ್ ಮಂಜೂರು ಮಾಡದೆ ಇದ್ದರೆ ನಾವು ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳಲ್ಲ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮುಂದೆ ಹೇಳಿದ್ದರು. ಆದಾದ ನಂತರ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿಯೋಗ ಹೋಗಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮೆಡಿಕಲ್ ಕಾಲೇಜ್ ಮಂಜೂರು ಮಾಡುವಂತೆ ಒತ್ತಡ ಹಾಕಿದ್ದರು. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡಿದ್ದ ಸಿಎಂ ಯಡಿಯೂರಪ್ಪ ಇಂದಿನ ಬಜೆಟ್ ನಲ್ಲಿ ಕೋಟೆ ನಾಡು ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜ್ ನ್ನು ಮಂಜೂರು ಮಾಡಿದ್ದಾರೆ. ಇದರಿಂದ ಕೋಟೆ ನಾಡು ಮಠಗಳು ಬೀಡು ಚಿತ್ರದುರ್ಗದ ಜನತೆಗೆ ಸ್ವಲ್ಪ ಸಮಾಧಾನ ತಂದಿದ್ದು ಒಂದು ಕಡೆಯಾದರೆ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲು ಅನುಮತಿ ನೀಡಿರುವುದು ಮಾತ್ರ ಅಡ್ಡಗೋಡೆ ಮೇಲೆ ದೀಪ ಇಟ್ಟಂತಾಗಿದೆ.
ಸಂಯುಕ್ತವಾಣಿ