ಕ್ಷಯರೋಗ ನಿರ್ವಹಣೆ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಜಿಲ್ಲೆಯನ್ನು ಕ್ಷಯ ಮುಕ್ತವಾಗಿಸಲು ಸನ್ನದ್ಧರಾಗಿ
ಕ್ಷಯರೋಗ ನಿರ್ಮೂಲನೆಗಾಗಿ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕ್ಷಯರೋಗ ನಿರ್ವಹಣೆ ತರಬೇತಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯಾಧಿಕಾರಿಗಳು ಜಿಲ್ಲೆಯನ್ನು ಕ್ಷಯಮುಕ್ತವಾಗಿಸಲು ಸನ್ನದ್ಧರಾಗಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ ಮಾತನಾಡಿ, ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ನಡೆಯುತ್ತಿದೆ. ಶೀಘ್ರ ಕ್ಷಯರೋಗ ಪತ್ತೆ ಹಚ್ಚಿ ನಿರ್ದಿಷ್ಟ ಚಿಕಿತ್ಸೆಗೆ ಒಳ ಪಡಿಸುವುದರಿಂದ ಕ್ಷಯರೋಗ ನಿರ್ಮೂಲನೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಕೌಶಲ್ಯ ಬಲ ಪಡಿಸಲು ಈ ತರಬೇತಿ ಕಾರ್ಯಾಗಾರ ಉಪಯುಕ್ತವಾಗಿದೆ ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಸಿ.ಓ.ಸುಧಾ ಮಾತನಾಡಿ, ಜಿಲ್ಲೆಯ ಕ್ಷಯರೋಗ ಪ್ರಕರಣಗಳ ವಾಸ್ತವ ಸ್ಥಿತಿಯನ್ನು ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು.
ರಾಜ್ಯ ಕಾರ್ಯಪಡೆ (ಟಿ.ಬಿ.) ಅಧ್ಯಕ್ಷರು ಡಾ.ಬಾಲು, ಡಾ.ನಾಗೇಂದ್ರ ಗೌಡ, ಡಾ.ಹಂಸವೇಣಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೌಶಲ್ಯ ಬಲ ಪಡಿಸಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ.ಕಾಶಿ, ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ. ಬಸವರಾಜ್, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ 85 ವೈದ್ಯಾಧಿಕಾರಿಗಳು, ಕ್ಷಯರೋಗ ವಿಭಾಗದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಾರುತಿಪ್ರಸಾದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಉಪಸ್ಥಿತರಿದ್ದರು