ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆ
ಜಿಲ್ಲೆಯಲ್ಲಿ ಆ. 20 ರಿಂದ ಮೂರು ದಿನ ವೈವಿಧ್ಯಮಯ ಕಾರ್ಯಕ್ರಮ- ಕವಿತಾ ಮನ್ನಿಕೇರಿ
ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆಯನ್ನು ಈ ಬಾರಿ ಜಿಲ್ಲೆಯಲ್ಲಿ ಆ. 20 ರಿಂದ 22 ರವರೆಗೆ ಮೂರು ದಿನಗಳ ಕಾಲ ವೈಶಿಷ್ಟ್ಯಪೂರ್ಣ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಈ ಬಾರಿ ಅರಸು ಅವರ ಜಯಂತಿಯನ್ನು ಮೂರು ದಿನಗಳ ಕಾಲ ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು.
ಕಾರ್ಯಕ್ರಮದ ಅಂಗವಾಗಿ ಆ. 20 ರಂದು ಬೆಳಿಗ್ಗೆ 09 ಗಂಟೆಗೆ ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ನೀಲಕಂಠೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಲಿದ್ದು, ನಗರದ ಪ್ರಮುಖ ರಸ್ತೆಯ ಮೂಲಕ ತ.ರಾ.ಸು. ರಂಗಮಂದಿರದ ವರೆಗೂ ಮೆರವಣಿಗೆ ಸಾಗಿ ಬರಲಿದೆ. ವೇದಿಕೆ ಸಮಾರಂಭ ಆ. 20 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ. ನಾರಾಯಣಸ್ವಾಮಿ ಅವರು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಶಿಷ್ಠಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಸೇರಿದಂತೆ ಎಲ್ಲ ಶಾಸಕರು, ಗಣ್ಯಮಾನ್ಯರು ಪಾಲ್ಗೊಳ್ಳುವರು. ಸಮಾರಂಭದಲ್ಲಿ ಸರ್ಕಾರಿ ಕಲಾ ಕಾಲೇಜಿನ ಪ್ರಾಚಾರ್ಯ ಕರಿಯಪ್ಪ ಮಾಳಿಗೆ ಅವರು ಡಿ. ದೇವರಾಜ ಅರಸು ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡುವರು.
ಆ. 20 ರಂದು ರಂಗಮಂದಿರ ಆವರಣದಲ್ಲಿ 20 ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮುದಾಯದವರಾದ ಬಡಗಿ, ನೇಕಾರ, ಕಮ್ಮಾರ, ಕುಂಬಾರ, ವಿಶ್ವಕರ್ಮ ಮೊದಲಾದ ಕುಲಕಸುಬುದಾರರು ತಯಾರಿಸಿದ ಉತ್ಪನ್ನಗಳ ವಸ್ತುಪ್ರದರ್ಶನ ಹಾಗೂ ಮಾರಾಟ ಮಳಿಗೆ, ವಿವಿಧ ಇಲಾಖೆಗಳಿಂದ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕುರಿತು ವಸ್ತುಪ್ರದರ್ಶನ ಮಳಿಗೆಯನ್ನು ತೆರೆಯಲಾಗುವುದು. ಮೂರು ದಿನಗಳ ಕಾಲ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮಕ್ಕಳಿಂದ ಸಂಗೀತ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಆ. 21 ರಂದು ಮಧ್ಯಾಹ್ನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಬಂಧ ಹಾಗೂ ಕ್ರೀಡೆಗಳಲ್ಲಿ ವಿಜೇತರಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಪಾರಿತೋಷಕದೊಂದಿಗೆ ಬಹುಮಾನ ವಿತರಣೆ, ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಒಬ್ಬ ಬಾಲಕ ಹಾಗೂ ಬಾಲಕಿಗೆ ಸನ್ಮಾನ, ತಾಲ್ಲೂಕು ಮಟ್ಟದಲ್ಲಿ ವಿದ್ಯಾರ್ಥಿನಿಲಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ತಾಲ್ಲೂಕಿಗೆ ಒಬ್ಬರಂತೆ ನಿಲಯ ಮೇಲ್ವಿಚಾರಕರು ಹಾಗೂ ಅಡುಗೆ ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುವುದು. ಇದೇ ದಿನದಂದು ಮಧ್ಯಾಹ್ನ ಹಾಸ್ಟೆಲ್ ಬಾಲಕಿಯರಿಂದ ಸ್ವಯಂ ರಕ್ಷಣೆಗಾಗಿ ನೀಡಲಾಗಿರುವ ಕರಾಟೆ ತರಬೇತಿ ಕಲೆಯ ಪ್ರದರ್ಶನ ನಡೆಯಲಿದೆ. ಆ. 22 ರಂದು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ : ಜಿಲ್ಲಾ ಮಟ್ಟದಲ್ಲಿ ಡಿ. ದೇವರಾಜ ಅರಸು ಪ್ರಶಸ್ತಿಯನ್ನು ಆಯ್ಕೆಯಾದ ಒಬ್ಬರು ವ್ಯಕ್ತಿ ಅಥವಾ ಸಂಘ ಸಂಸ್ಥೆಗೆ ಆ. 20 ರಂದು ಜರುಗುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಪ್ರಶಸ್ತಿಗೆ ವ್ಯಕ್ತಿ ಅಥವಾ ಸಂಘ ಸಂಸ್ಥೆಯನ್ನು ಆಯ್ಕೆ ಮಾಡಲಿದೆ. ಪ್ರಶಸ್ತಿಗೆ ದೇವರಾಜ ಅರಸು ಅವರ ಧ್ಯೇಯೋದ್ದೇಶಗಳನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರತರಾಗಿರಬೇಕು, ಅರಸು ಅವರು ಕಾರ್ಯಗತಗೊಳಿಸಿದ ಯೋಜನೆ, ಕಾರ್ಯಕ್ರಮಗಳಲ್ಲಿ ಕನಿಷ್ಟ ಒಂದೆರಡರಲ್ಲಿಯಾದರೂ ಸ್ವಯಂ ಪ್ರೇರಣೆಯಿಂದ ತಮ್ಮನ್ನು ತೊಡಗಿಸಿಕೊಂಡು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರಬೇಕು. ಹಿಂದುಳಿದ ವರ್ಗಗಳನ್ನು ಸಂಘಟಿಸಿ ಅವರ ಶ್ರೇಯೋಭಿವೃದ್ಧಿಗೆ ದುಡಿಯುತ್ತಿರಬೇಕು ಹಾಗೂ ಮೀಸಲಾತಿ, ಶಿಕ್ಷಣ, ಸಾಮಾಜಿಕ ಪರಿವರ್ತನೆಗಾಗಿ ಶ್ರಮಿಸಿರಬೇಕು. ಹಿಂದುಳಿದ ವರ್ಗಗಳ ಶಿಕ್ಷಣ, ಆರ್ಥಿಕ ಅಭಿವೃದ್ಧಿ, ಔದ್ಯೋಗಿಕ ಕ್ಷೇತ್ರಗಳಲ್ಲಿ ಕಾರ್ಯನಿರತರಾಗಿದ್ದು, ಈ ಸಂಬಂಧ ಅವರ ಕೊಡುಗೆ ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಿಟ್ಟಿರಬೇಕು. ಹಿಂದುಳಿದ ವರ್ಗಗಳ ಅತ್ಯಂತ ಹಿಂದುಳಿದ ಜನಾಂಗವನ್ನು ಮುಖ್ಯ ವಾಹಿನಿಗೆ ತರಲು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಶ್ರಮಿಸುತ್ತಿರಬೇಕು. ಈ ಮಾನದಂಡಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ. ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವೆಂಕಟೇಶಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಪಿ. ಅವರು ಉಪಸ್ಥಿತರಿದ್ದರು.





