ಚಿತ್ರದುರ್ಗ ಮೇ(05): ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಸಮೀಕ್ಷೆ ಕಾರ್ಯಕ್ಕೆ ಸೋಮವಾರ ಚಿತ್ರದುರ್ಗದ ಗಾಂಧಿನಗರದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು.
ನಗರದ ಐಯುಡಿಪಿ ಬಡಾವಣೆ ಸಮೀಪದ ಗಾಂಧಿ ನಗರದಲ್ಲಿ ಸೋಮವಾರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ಕ್ಕೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ. ಸೋಮಶೇಖರ್ ಅವರು ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ವಿವಿಧ ಮುಖಂಡರುಗಳ ಉಪಸ್ಥಿತಿಯಲ್ಲಿ ಚಾಲನೆ ನೀಡಿದರು.
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ಸಮಾನತೆ ಮತ್ತು ಸಾಮಾಜಿಕ ನ್ಯಾಯ ಎಲ್ಲಾ ವರ್ಗದವರಿಗೆ ಎಲ್ಲಾ ಕಾಲದಲ್ಲಿಯೂ ನೀಡುವುದು ಸರ್ಕಾರದ ಅತಿ ದೊಡ್ಡ ಆಕಾಂಕ್ಷೆಯಾಗಿದೆ. ಈ ಸಮಾನತೆಯ ಪರಿಕಲ್ಪನೆ ಅನೇಕ ಶ್ರೇಷ್ಠ ಚಿಂತನಶೀಲರು ಮತ್ತು ದಾರ್ಶನಿಕರಿಂದ ಸ್ಪೂರ್ತಿ ಪಡೆದಿದೆ. ಇವರಿಂದ ಪ್ರತಿಪಾದಿಸಲ್ಪಟ್ಟ ಸಮಾನತೆಯ ತತ್ವವೆಂದರೆ ಎಲ್ಲಾ ನಾಗರೀಕರಿಗೆ ಸಮಾನ ಸ್ಥಾನಮಾನ ಹಾಗೂ ಅವಕಾಶ ನೀಡುವುದಾಗಿದೆ. ಭಾರತದ ಸಂವಿಧಾನದ 15ನೇ ಪರಿಚ್ಛೇದವು ಮತ್ತು ಕುಲ, ಜಾತಿ, ಲಿಂಗ ಮತ್ತು ಜನ್ಮ ಸ್ಥಳಗಳ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ. ಅದೇ ರೀತಿ ಪರಿಚ್ಛೇದ 16ರಲ್ಲಿ ಎಲ್ಲರಿಗೂ ಸಾರ್ವತ್ರಿಕ ಉದ್ಯೋಗ ವಲಯದಲ್ಲಿ ಸರಿಸಮಾನ ಅವಕಾಶಗಳ ಒದಗಿಸಲು ಅನುವು ಮಾಡಿಕೊಡಲಾಗಿದೆ. ವಿಭಿನ್ನ ಸ್ಥಳಗಳಲ್ಲಿ ವಾಸವಾಗಿರುವ ಅಥವಾ ವಿಭಿನ್ನ ವೃತ್ತಿಗಳಲ್ಲಿ ತೊಡಗಿರುವ ವ್ಯಕ್ತಿಗಳು ಹಾಗೂ ಜನ ಸಮೂಹಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡಲು ಮತ್ತು ಸ್ಥಾನಮಾನ ಸೌಲಭ್ಯ ಹಾಗೂ ಅವಕಾಶಗಳಲ್ಲಿ ತಾರತಮ್ಯವನ್ನು ತೊಡೆದು ಹಾಕಲು ಕಾರ್ಯಕ್ರಮ ರೂಪಿಸುವುದಕ್ಕಾಗಿ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ ಮಾಡಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿರುತ್ತದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುವ ಜಾತಿಗಳನ್ನು ಉಪ ವರ್ಗೀಕರಣ ಮಾಡಿ ಒಳ ಮೀಸಲಾತಿಯನ್ನು ನೀಡಬಹುದು ಎಂದು 2024ರ ಆಗಸ್ಟ್ 01ರಂದು ತೀರ್ಪು ನೀಡಿದೆ. ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಮಾಡಲು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ನೇಮಿಸಿ ಒಳ ಮೀಸಲಾತಿಯನ್ನು ವರ್ಗೀಕರಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಉಪ ವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶಗಳನ್ನು ಸಂಗ್ರಹಿಸಲು ಸಮೀಕ್ಷೆಯನ್ನು ಕೈಗೊಳ್ಳಲು ಉದ್ದೇಶಿಸಿರುತ್ತದೆ ಎಂದು ಮಾಹಿತಿ ನೀಡಿದರು.
ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು ನ್ಯಾಯಮೂರ್ತಿ ಡಾ.ಹೆಚ್.ಎಸ್.ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಉದ್ದೇಶವಾಗಿದ್ದು, ಪರಿಶಿಷ್ಟ ಜಾತಿಗಳ ಸ್ಥಿತಿಗತಿಗಳ ಬಗ್ಗೆ ವೈಜ್ಞಾನಿಕವಾಗಿ ಮತ್ತು ವಾಸ್ತವಿಕ ಮಾಹಿತಿ ಪಡೆದುಕೊಂಡು ಒಳ ಮೀಸಲಾತಿಯನ್ನು ವರ್ಗೀಕರಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿರುತ್ತದೆ. ಸಮೀಕ್ಷೆಯಿಂದ ಹೊರಹೊಮ್ಮಿದ ಅಂಶಗಳ ಆಧಾರದಲ್ಲಿ ಅಂತಹ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಾನಮಾನವನ್ನು ಅಧ್ಯಯನ ಮಾಡಿ ಒಳ ಮೀಸಲಾತಿ ವರ್ಗೀಕರಣವನ್ನು ಮಾಡುವುದಕ್ಕಾಗಿ ಎಲ್ಲಾ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಕುರಿತು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಒಳ ಮೀಸಲಾತಿ ಜಾರಿ ಸಂಬಂಧ ಮನೆ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸೂಕ್ತ ರೀತಿಯಲ್ಲಿ ಮಾಹಿತಿ ನೀಡಿ, ಅಗತ್ಯ ಸಹಕಾರ ನೀಡುವ ಮೂಲಕ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿ, ಒಳ ಮೀಸಲಾತಿಯ ಹಂಚಿಕೆಗೆ ಸಹಕರಿಸಬೇಕು ಎಂದು ಪರಿಶಿಷ್ಟ ಜಾತಿಯ ಎಲ್ಲ ಸಮುದಾಯದವರಿಗೆ ಮನವಿ ಮಾಡಿದರು.
ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಆರಂಭಗೊಂಡಿದ್ದು, ಈ ಸಮೀಕ್ಷೆಯು ಮೂರು ಹಂತಗಳಲ್ಲಿ ನಡೆಯಲಿದೆ.
ಮೇ 05 ರಿಂದ 17 ರವರೆಗೆ ನಡೆಯುವ ಮೊದಲ ಹಂತದ ಸಮೀಕ್ಷೆಯಲ್ಲಿ ಮನೆ-ಮನೆ ಭೇಟಿ ನೀಡಿ, ಮೇ 19 ರಿಂದ 21 ರವರೆಗೆ ನಡೆಯುವ ಎರಡನೇ ಹಂತ ಸಮೀಕ್ಷೆ ಬ್ಲಾಕ್ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ ಭೇಟಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವುದು. ಮೂರನೇ ಹಂತ ಮೇ 19 ರಿಂದ 21 ರವರೆಗೆ ಸ್ವಯಂ ಘೋಷಣೆ (ಆನ್ಲೈನ್ ಮೂಲಕ) ಸಮೀಕ್ಷೆಗೆ ಮಾಹಿತಿ ಒದಗಿಸಬಹುದಾಗಿದೆ.
ಒಳ ಮೀಸಲಾತಿ ಜಾತಿ ಗಣತಿಗೆ 1,825 ಶಿಕ್ಷಕರ ನಿಯೋಜನೆ: ರಾಜ್ಯ ಸರ್ಕಾರವು ಅಭಿವೃದ್ಧಿ ಪಡಿಸಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಮೊಬೈಲ್ ಆ್ಯಪ್ ಮೂಲಕ ದತ್ತಾಂಶ ಸಂಗ್ರಹಿಸಲಾಗುವುದು. ಸಮೀಕ್ಷಾ ಕಾರ್ಯ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ 3 ಮಾಸ್ಟರ್ ಟ್ರೈನರ್ಸ್ಗಳನ್ನು ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿ ತಾಲ್ಲೂಕಿನಿಂದ 5 ರಂತೆ ಒಟ್ಟು 30 ತಾಲ್ಲೂಕು ಮಾಸ್ಟರ್ಸ್ ಟ್ರೈನರ್ಸ್ಗಳು, 1,661 ಗಣತೀದಾರರು, 164 ಮೇಲ್ಚಿಚಾರಕರು ಸೇರಿದಂತೆ ಒಟ್ಟು 1,825 ಶಿಕ್ಷಕರನ್ನು ಶಿಕ್ಷಣ ಇಲಾಖೆಯಿಂದ ನಿಯೋಜಿಸಲಾಗಿದೆ ಅಲ್ಲದೆ, ಸಮಗ್ರ ಮೇಲ್ಚಿಚಾರಣೆಗೆ ತಾಲ್ಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ 6 ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಸಮೀಕ್ಷಾ ಕಾರ್ಯದ ಪೂರ್ವಭಾವಿಯಾಗಿ ರಾಜ್ಯ ಮಟ್ಟದಲ್ಲಿ ನಡೆದ ತರಬೇತಿಗೆ ಚಿತ್ರದುರ್ಗ ಜಿಲ್ಲಾ ಹಂತದಿಂದ 03 ಮಾಸ್ಟರ್ ಟ್ರೈನರ್ಗಳನ್ನು ನಿಯೋಜಿಸಲಾಗಿದ್ದು, ಮಾಸ್ಟರ್ ಟ್ರೈನರ್ಗಳು 2025ರ ಏಪ್ರಿಲ್ 25ರಂದು ಬೆಂಗಳೂರಿನಲ್ಲಿ ನಡೆದ ತರಬೇತಿಯಲ್ಲಿ ಭಾಗವಹಿಸಿ, ಸಮೀಕ್ಷಾ ಕಾರ್ಯಗಳ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸಮೀಕ್ಷೆ ದತ್ತಾಂಶ ಸಂಗ್ರಹಿಸುವ ಕುರಿತು ಈಗಾಗಲೇ ತರಬೇತಿಯನ್ನು ಪಡೆದ ಜಿಲ್ಲಾ ಮಟ್ಟದ ಮಾಸ್ಟರ್ಸ್ ಟ್ರೈನರ್ಸ್ಗಳಿಂದ ತಾಲ್ಲೂಕು ಮಟ್ಟದ ಮಾಸ್ಟರ್ಸ್ ಟ್ರೈನರ್ಸ್ಗಳಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ 2025ರ ಏಪ್ರಿಲ್ 28ರಂದು ತರಬೇತಿ ನೀಡಲಾಗಿದೆ. ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನೊಳಗೊಂಡ ತಾಲ್ಲೂಕು ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸಮೀಕ್ಷೆ ದತ್ತಾಂಶ ಸಂಗ್ರಹಿಸುವ ಕುರಿತು ಈಗಾಗಲೇ ತರಬೇತಿ ಪಡೆದ ತಾಲ್ಲೂಕು ಮಟ್ಟದ ಮಾಸ್ಟರ್ಸ್ ಟ್ರೈನರ್ಸ್ಗಳಿಂದ 2025ರ ಮೇ 02ರಂದು ಸಮೀಕ್ಷಾ ಕಾರ್ಯ ಕೈಗೊಳ್ಳುವ ಕುರಿತು ನಿಯೋಜಿಸಲಾದ ಶಿಕ್ಷಣ ಇಲಾಖೆಯ ಗಣತೀದಾರರಿಗೆ ಮತ್ತು ಮೇಲ್ವಿಚಾರಕರುಗಳಿಗೆ ತರಬೇತಿ ನೀಡಲಾಗಿದೆ.
ಸಮೀಕ್ಷೆ ಕುರಿತು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಪರಿಶಿಷ್ಟ ಜಾತಿ ಜನಾಂಗದ ಸಮುದಾಯಗಳಿಗೆ ಸ್ಥಳೀಯ ಸಂಸ್ಥೆಗಳ ಮೂಲಕ, ದಿನಪತ್ರಿಕೆ ಹಾಗೂ ಆಕಾಶವಾಣಿ ಪ್ರಸಾರ ಕೇಂದ್ರದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದ್ದು, ಎಲ್ಲಾ ಪರಿಶಿಷ್ಟ ಜಾತಿ ಜನಾಂಗದವರ ಮನೆ ಮನೆಗೆ ಸಮೀಕ್ಷಾ ಕಾರ್ಯಕ್ಕೆ ಭೇಟಿ ನೀಡುವ ಗಣತಿದಾರರು ಮನೆಯ ಮುಖ್ಯಸ್ಥರ ಒಪ್ಪಿಗೆ ಪಡೆದು ದತ್ತಾಂಶವನ್ನು ಸಂಗ್ರಹಿಸಲು ನಿರ್ದೇಶಿಸಲಾಗಿದೆ. ಸಮೀಕ್ಷೆ ನಡೆಸುವ ಎಲ್ಲಾ ಗಣತಿದಾರರಿಗೆ ಅಗತ್ಯ ಕಿಟ್ಗಳನ್ನು ವಿತರಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಸೇರಿದಂತೆ ಗಣತಿದಾರರು, ಮೇಲ್ವಿಚಾರಕರು, ಸಮಾಜದ ಹಲವು ಮುಖಂಡರು ಇದ್ದರು.



