ತೆಲಂಗಾಣದ ಮುಖ್ಯಮಂತ್ರಿಗಳ ಆರೋಪ ಚುನಾವಣಾ ಪ್ರೇರಿತ
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ರಾಜ್ಯದ ಜನತೆಯನ್ನು ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತೆಲಂಗಾಣ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿತು. ನಾವು ಅಧಿಕಾರ ಸ್ವೀಕರಿಸಿದ ಮೇ 20 ರ ದಿನದಂದೇ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿ, ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು ಎಂದರು.
*ಶಕ್ತಿ ಯೋಜನೆಗೆ ಮಹಿಳೆಯರ ಮೆಚ್ಚುಗೆ :*
ನಮ್ಮ ಮೊದಲ ಗ್ಯಾರಂಟಿಯಾದ ಮಹಿಳೆರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯನ್ನು ಜೂನ್ 11 ರಿಂದ ಜಾರಿಗೊಳಿಸಲಾಯಿತು. ನಿನ್ನೆಯ ದಿನ ರಾಜ್ಯದಲ್ಲಿ 100.47 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನದ ಸಂಭ್ರಮವನ್ನು ಆಚರಿಸಲಾಯಿತು. ರಾಜ್ಯದಲ್ಲಿ ಯಾವ ಜಾತಿಧರ್ಮಗಳ ಬೇಧವಿಲ್ಲದೇ ಪ್ರತಿದಿನ 60 ಲಕ್ಷ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಾತೆ. ಶ್ರಮಿಕ , ಉದ್ಯೋಗಸ್ಥ ಸೇರಿದಂತೆ ಎಲ್ಲ ವರ್ಗದ ಮಹಿಳೆಯರು ಯೋಜನೆಯ ಲಾಭಪಡೆಯುತ್ತಿದ್ದು, ಇದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿಗಳು ಚುನಾವಣೆಯ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಆದರೆ ಇಲ್ಲಿನ ಇತರೆ ಪಕ್ಷಗಳು ಏಕೆ ಸುಳ್ಳು ಹೇಳುತ್ತಿವೆ ಎಂದು ಪ್ರಶ್ನಿಸಿದರು.
*ಅನ್ನಭಾಗ್ಯ:*
ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ನೀಡಿತು. ಇದರ ಅನುಷ್ಠಾನಕ್ಕಾಗಿ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಈ ಮನವಿಗೆ ಸ್ಪಂದಿಸಲಿಲ್ಲ. ಆದ್ದರಿಂದ 5 ಕೆಜಿ ಅಕ್ಕಿಯ ಬದಲು ಅದರ ಮೊತ್ತವನ್ನು ಜನರಿಗೆ ನೀಡಲು ಸರ್ಕಾರ ನಿರ್ಧರಿಸಿತು.ಈ ನಿಟ್ಟಿನಲ್ಲಿ 4.37 ಕೋಟಿ ಪ್ರತಿಯೊಬ್ಬರಿಗೆ ತಲಾ 700 ರೂ.ಗಳನ್ನು ಪ್ರತಿ ಫಲಾನುಭವಿಯ ಖಾತೆಗೆ ನೀಡಲಾಗುತ್ತಿದೆ ಎಂದರು.
*ಗೃಹಜ್ಯೋತಿ:*
ಗೃಹಜ್ಯೋತಿ ಯೋಜನೆಯನ್ನು ಜುಲೈ 2023 ರಿಂದಲೇ ಜಾರಿಗೊಳಿಸಲಾಗಿದ್ದು,ರಾಜ್ಯದ ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನ್ನು ಉಚಿತವಾಗಿ ನೀಡಲಾಗುತ್ತಿದೆ. 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಗೆ ಶೇ. 10 ರಷ್ಟು ಹೆಚ್ಚಿನ ಯೂನಿಟ್ ಸೇರಿಸಿ ನೀಡಲಾಗುತ್ತಿದೆ ಎಂದರು.
*ಗೃಹಲಕ್ಷ್ಮಿ:*
ಗೃಹಲಕ್ಷ್ಮಿ ಯೋಜನೆಯಡಿ 1.14 ಕೋಟಿ ಮಹಿಳಾ ಯಜಮಾನಿಗೆ ತಲಾ 2000 ರೂ. ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯ ನೋಂದಣಿ ನಿರಂತರವಾಗಿ ನಡೆಯುತ್ತಿದ್ದು, ಯಾವುದೇ ಅಡಚಣೆಗಳಿಲ್ಲದೇ ಯೋಜನೆಯ ಲಾಭವನ್ನು ಮಹಿಳೆಯರು ಪಡೆಯಬಹುದಾಗಿದೆ ಎಂದರು.





